ಮಂಗಳೂರು: ಅರಬ್ಬಿಸಮುದ್ರದಲ್ಲಿ ವಾಯುಭಾರಕುಸಿತ - ಜೂನ್ 6ರಿಂದ 11ರವರೆಗೆ ಕರಾವಳಿಯಲ್ಲಿ ಭಾರೀ ಮಳೆ
Tuesday, June 6, 2023
ಮಂಗಳೂರು: ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಇದೀಗ ಹವಾಮಾನ ಇಲಾಖೆಯು ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಜೂನ್ 6ರಿಂದ 11ರವರೆಗೆ ಭಾರೀ ಮಳೆಯಾಗಲಿದ್ದು, ಸಮುದ್ರದಲ್ಲಿ ಅಬ್ಬರ ಹೆಚ್ಚಾಗಲಿದೆ. ಆದ್ದರಿಂದ ಕಡಲ ತೀರ ಪ್ರದೇಶದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ದ.ಕ. ಜಿಲ್ಲಾಡಳಿತ ಸೂಚನೆ ನೀಡಿದೆ.
ಕೇರಳಕ್ಕೆ ಜೂನ್ 4ರಂದು ಮುಂಗಾರು ಪ್ರವೇಶದ ನಿರೀಕ್ಷೆಯಿತ್ತು. ಆದರೆ ಅದು ಮತ್ತಷ್ಟು ವಿಳಂಬದಿಂದ ಕರಾವಳಿಗೆ ಇನ್ನೂ ಮಳೆ ಬಂದಿಲ್ಲ. ಜೂನ್ 10ರ ವೇಳೆಗೆ ಕೇರಳಕ್ಕೆ ಮುಂಗಾರು ಆಗಮಿಸುವ ಸಾಧ್ಯತೆಯಿದ್ದು ಆನಂತರವಷ್ಟೇ ರಾಜ್ಯದ ಮುಂಗಾರು ಪ್ರವೇಶವಾಗಲಿದೆ. ಕರಾವಳಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಕಾಣಿಸಿಕೊಂಡಲ್ಲಿ ಮುಂಗಾರು ಪ್ರಬಲಗೊಂಡು ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿಲ್ಲ.