ಬೆಂಗಳೂರು: ಮದ್ಯದ ಅಮಲು, ಒನ್ ವೇನಲ್ಲಿ ಚಾಲನೆ; ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಇಬ್ಬರು ಬಲಿ...!
ಬೆಂಗಳೂರು: ಒನ್ ವೇನಲ್ಲಿ ಕಾರು ಚಲಾಯಿಸಿದ ಚಾಲಕನ ನಿರ್ಲಕ್ಷ್ಯಕ್ಕೆ ಇಬ್ಬರು ಅಮಾಯಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಡರಾತ್ರಿ ನಗರದ ವಕ್ಫ್ ಬೋರ್ಡ್ ಕಚೇರಿ ಸಮೀಪ ಸಂಭವಿಸಿದೆ.
ಕಾರು ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿದ್ದ ಜುಬೇರ್ ಅಹಮದ್ (42) ಮತ್ತು ಅಬ್ದುಲ್ ಮುನೀರ್ ಪಾಷಾ (16) ಸ್ಥಳದಲ್ಲೇ ಅಸುನೀಗಿದ್ದಾರೆ. ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಅಯ್ಯಪ್ಪ ಎಂಬಾತನನ್ನು ಹೈಗ್ರೌಂಡ್ಸ್ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.
ಒನ್ ವೇ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರು ಚಾಲಕ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ. ಆರೋಪಿ ಚಾಲಕನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ಆತ ಮದ್ಯ ಸೇವಿಸಿರುವುದು ದೃಢಪಟ್ಟಿದೆ. ಆರೋಪಿ ವಿರುದ್ಧ ನಿರ್ಲಕ್ಷ್ಯದ ಚಾಲನೆ ಮತ್ತು ಮದ್ಯಪಾನ ಮಾಡಿ ಜೀವಹಾನಿ ಉಂಟುಮಾಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾರನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.