ಮಂಗಳೂರು :ವಾರದೊಳಗೆ ವೈದ್ಯರ ನೇಮಕಾತಿ ಆಗದಿದ್ದರೆ ಡಿಹೆಚ್‌ಒ ಅಮಾನತು: ಸಚಿವ ಯು.ಟಿ.ಖಾದರ್ ಎಚ್ಚರಿಕೆ...!!!

ಮಂಗಳೂರು :ವಾರದೊಳಗೆ ವೈದ್ಯರ ನೇಮಕಾತಿ ಆಗದಿದ್ದರೆ ಡಿಹೆಚ್‌ಒ ಅಮಾನತು: ಸಚಿವ ಯು.ಟಿ.ಖಾದರ್ ಎಚ್ಚರಿಕೆ...!!!

DHO will be suspended if doctor appointment order is not issued within a week: Minister U T Khader
ಮಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿಯಿರುವ ಎಂಬಿಬಿಎಸ್ ವೈದ್ಯರ ಹುದ್ದೆಗಳಿಗೆ ವಾರದ ಒಳಗಾಗಿ ನೇಮಕಾತಿ ಪ್ರಕ್ರಿಯೆ ಮುಗಿಸದಿದ್ದರೆ, ಸಂಬಂಧಪಟ್ಟ ಜಿಲ್ಲಾ ಆರೋಗ್ಯ ಅಧಿಕಾರಿಗಳನ್ನು (ಡಿಹೆಚ್‌ಒ) ತಕ್ಷಣವೇ ಅಮಾನತು ಮಾಡಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಭಾನುವಾರ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಸದ್ಯ ರಾಜ್ಯದಲ್ಲಿ ಸುಮಾರು 900 ಎಂಬಿಬಿಎಸ್ ವೈದ್ಯರ ಕೊರತೆಯಿದ್ದು, ಖಾಲಿಯಿರುವ ಖಾಯಂ ಹುದ್ದೆಗಳ ಭರ್ತಿಗೆ ಸರ್ಕಾರ ಸಿದ್ಧತೆಯಲ್ಲಿದೆ. ಈ ನಡುವೆ, ಎಂಬಿಬಿಎಸ್ ಪದವಿ ಮುಗಿಸಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಲು ಇಚ್ಛಿಸುವ ವೈದ್ಯರಿಗೆ ತಕ್ಷಣವೇ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಆಸಕ್ತ ವೈದ್ಯರು ತಮ್ಮ ಜಿಲ್ಲೆಯ ಡಿಹೆಚ್‌ಒ ಅವರಿಗೆ ಅರ್ಜಿ ಸಲ್ಲಿಸಬೇಕು. ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸಿ, ಜಿಲ್ಲಾಧಿಕಾರಿಗಳ ಸಹಿ ಪಡೆದು ಕೇವಲ ಒಂದು ವಾರದಲ್ಲಿ ನೇಮಕಾತಿ ಆದೇಶ ನೀಡಬೇಕು. ಇದರಲ್ಲಿ ವಿಳಂಬ ಧೋರಣೆ ಅನುಸರಿಸಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇನ್ನುಳಿದಂತೆ, ಹೊಸದಾಗಿ ಸೇರ್ಪಡೆಯಾಗುವ ಎಂಬಿಬಿಎಸ್ ವೈದ್ಯರಿಗೆ ಆರಂಭದಲ್ಲೇ ಮಾಸಿಕ 60 ಸಾವಿರ ರೂಪಾಯಿ ವೇತನ ನಿಗದಿಪಡಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ: ಸಚಿವರು ಉಳ್ಳಾಲ ಸಯ್ಯದ್ ಮದನಿ ದರ್ಗಾ ಶರೀಫ್, ಉಳ್ಳಾಲ ಶ್ರೀ ಭಗವತಿ ಕ್ಷೇತ್ರ, ತೊಕ್ಕೊಟು ಸಂತ ಸೆಬಾಸ್ಟಿಯನ್ ಚರ್ಚ್ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ದೇವರ ದರ್ಶನ ಪಡೆದರು. ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯು ಸಚಿವರನ್ನು ಅದ್ದೂರಿಯಾಗಿ ಸ್ವಾಗತಿಸಿತು


ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಕುರಿತು ಕೇಳಲಾದ ಪ್ರಶ್ನೆಗೆ, ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು. ಈ ಹಿಂದೆ ಹಲವು ಜಿಲ್ಲೆಗಳಲ್ಲಿ ನಾನು ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ಸಿಎಂ ಅವರು ಬೇರೆ ಜಿಲ್ಲೆಯ ಜವಾಬ್ದಾರಿ ನೀಡಿದರೂ ಅಲ್ಲಿನ ಸಂಸ್ಕೃತಿಯನ್ನು ಅರಿಯುವ ನಮಗೆ ಹೊಸ ಅನುಭವ ಸಿಗುತ್ತದೆ ಎಂದರು.

ಆಸ್ಪತ್ರೆಗಳ ಅವ್ಯವಸ್ಥೆ ಸುಧಾರಿಸಲು ತಡರಾತ್ರಿ ದಿಢೀರ್ ಭೇಟಿ ಸೂಕ್ತ: ಸರ್ಕಾರಿ ಆಸ್ಪತ್ರೆಗಳಿಗೆ ಕೈಗೊಳ್ಳುವ ದಿಢೀರ್ ಭೇಟಿಗಳ ಕುರಿತು ಮಾತನಾಡಿದ ಯು.ಟಿ.ಖಾದರ್, ಆಸ್ಪತ್ರೆಗಳ ನೈಜ ಸ್ಥಿತಿ ಮತ್ತು ಅಲ್ಲಿನ ಅವ್ಯವಸ್ಥೆಗಳು ಬೆಳಕಿಗೆ ಬರಬೇಕಾದರೆ ಮಧ್ಯರಾತ್ರಿಯ ಭೇಟಿ ಅತ್ಯಗತ್ಯ. ಇದರಿಂದ ವೈದ್ಯರು ಮತ್ತು ಸಿಬ್ಬಂದಿ ಕರ್ತವ್ಯದಲ್ಲಿದ್ದಾರೆಯೇ? ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿದೆಯೇ? ಮತ್ತು ಸ್ವಚ್ಛತೆ ಹೇಗಿದೆ? ಎಂಬುದು ಸ್ಪಷ್ಟವಾಗುತ್ತದೆ. ಇತ್ತೀಚೆಗಷ್ಟೇ ನಾನು ಇಂತಹದೊಂದು ದಿಢೀರ್ ಭೇಟಿ ನಡೆಸಿ, ವೈದ್ಯರ ಸಭೆ ಕರೆದು ಲೋಪದೋಷಗಳನ್ನು ಸರಿಪಡಿಸಲು ಸೂಚಿಸಿದ್ದೇನೆ. ಕೇವಲ ನಾನಷ್ಟೇ ಅಲ್ಲ, ಜಿಲ್ಲಾ ಆರೋಗ್ಯ ಅಧಿಕಾರಿಗಳೂ ಕೂಡ ಇದೇ ಮಾದರಿಯಲ್ಲಿ ರಾತ್ರಿ ವೇಳೆ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಖಾಸಗೀಕರಣದ ವದಂತಿಗೆ ತೆರೆ: ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ನುರಿತ ಸಿಬ್ಬಂದಿ ಹೊಂದಿರುವ ಸರ್ಕಾರಿ ಆಸ್ಪತ್ರೆಗಳನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಯೋಚನೆ ಸರ್ಕಾರದ ಮುಂದಿಲ್ಲ. ಆದರೆ, ಮೂಲಸೌಕರ್ಯಗಳಿದ್ದು ವೈದ್ಯರು ಮತ್ತು ಸಿಬ್ಬಂದಿಯ ತೀವ್ರ ಕೊರತೆ ಇರುವ ಆಸ್ಪತ್ರೆಗಳಲ್ಲಿ ಮಾತ್ರ ರೋಗಿಗಳ ಹಿತದೃಷ್ಟಿಯಿಂದ ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

Ads on article

Advertise in articles 1

advertising articles 2

Advertise under the article