ಸುರತ್ಕಲ್: ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಗುತ್ತಿಗೆದಾರ ಸಾವು..!!
Tuesday, August 11, 2026
ಸುರತ್ಕಲ್: ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಹೈಟೆನ್ಷನ್ ವಿದ್ಯುತ್ ತಂತಿಗೆ ತಾಗಿ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್ನಲ್ಲಿ ನಡೆದಿದೆ.
ಮೃತರನ್ನು ಕೃಷ್ಣಾಪುರ ಚಕ್ರವರ್ತಿ ಕ್ರೀಡಾಂಗಣ ಸಮೀಪದ ನಿವಾಸಿ ಹಾಗೂ ಶೀಟ್ ಮೇಲ್ಛಾವಣಿ ನಿರ್ಮಾಣ ಗುತ್ತಿಗೆದಾರ ಭಾಸ್ಕರ ಎಂದು ಗುರುತಿಸಲಾಗಿದೆ.
ಕೃಷ್ಣಾಪುರ 6ನೇ ಬ್ಲಾಕ್ನ ವಸತಿ ಸಮುಚ್ಚಯವೊಂದರಲ್ಲಿ ತಗುಡು ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಭಾಸ್ಕರ ಅವರು ಕಬ್ಬಿಣದ ರಾಡ್ ಬಳಸಿ ಅಳತೆ ತೆಗದುಕೊಳ್ಳುತ್ತಿದ್ದರು. ಕಬ್ಬಿಣದ ರಾಡ್ ಅನ್ನು ಕಂಕುಳಲ್ಲಿಟ್ಟುಕೊಂಡು ತಿರುಗುವ ಸಂದರ್ಭದಲ್ಲಿ ಕಟ್ಟಡದ ಪಕ್ಕದಲ್ಲೇ ಹಾದುಹೋಗಿದ್ದ ಹೈಟೆನ್ಷನ್ ವಿದ್ಯುತ್ ತಂತಿಗೆ ರಾಡ್ ತಗುಲಿದೆ ಎನ್ನಲಾಗಿದೆ.
ವಿದ್ಯುತ್ ತಂತಿಗೆ ರಾಡ್ ಸ್ಪರ್ಶಿಸಿದ ಪರಿಣಾಮ ಭಾಸ್ಕರ ಅವರಿಗೆ ತೀವ್ರ ವಿದ್ಯುತ್ ಆಘಾತವಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸುರತ್ಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಭಾಸ್ಕರ ಅವರ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.