ಸುಬ್ರಹ್ಮಣ್ಯ :ಕುಕ್ಕೆ ಸುಬ್ರಹ್ಮಣ್ಯ ಬಲಿ ಕೆ ಎಸ್ ಆರ್ ಟಿ ಸಿ ಬಸ್ ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ 37 ಪ್ರಯಾಣಿಕರು ಪಾರು.
Saturday, September 5, 2026
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಒಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಸುಬ್ರಹ್ಮಣ್ಯ- ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 37 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಿಂದ ಪ್ರಯಾಣಿಕರನ್ನು ಕರೆದೊಯ್ದಿದ್ದ ಬಿಸಿ ರೋಡ್ ಡಿಪೋಗೆ ಸೇರಿದ ಸಾರಿಗೆ ಬಸ್ ನಲ್ಲಿ ಎರ್ಮಾಯಿಲ್ ಸಮೀಪ ಸಂಚಾರಿಸುತ್ತಿದ್ದ ವೇಳೆ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಅದನ್ನು ಗಮನಿಸಿದ ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಎಚ್ಚರಿಸಿದ್ದಾರೆ ಯಾವುದೇ ಆತಂಕಕ್ಕೆ ಒಳಗಾಗದೆ ಪ್ರಯಾಣಿಕರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸುವಲ್ಲಿ ಚಾಲಕ ಯಶಸ್ವಿಯಾಗಿದ್ದಾರೆ. ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಸುರಕ್ಷಿತವಾಗಿ ಹೊರಬಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ಬಸ್ ಸಂಪೂರ್ಣವಾಗಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದೆ.
ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಬಸ್ಸಿನ ಬಹುತೇಕ ಭಾಗ ಸುಟ್ಟು ಕರಕಲಾಗಿದೆ. ಸುಬ್ರಮಣ್ಯ ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 32 ಮಂದಿ ಪ್ರಯಾಣಿಕರು ಸಕಾಲದಲ್ಲಿ ಕೆಳಗಿಳಿದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸುವ ಕಾರ್ಯ ನಡೆಸಿದರು. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಬಸ್ಸಿನ ಇಂಜಿನ್ ವಿಭಾಗದಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿತೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಯಬೇಕಿದೆ. ನಿಖರ ಕಾರಣ ಹಾಗೂ ಸಂಭವಿಸಿರುವ ನಷ್ಟದ ಕುರಿತು ಅಧಿಕೃತ ತನಿಖೆಯ ಬಳಿಕವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಚಾಲಕ ತಕ್ಷಣ ಬಸ್ ನಿಲ್ಲಿಸಿ, ಎಲ್ಲರನ್ನೂ ಹೊರಗೆ ಕಳಿಸಿರುವುದು ದೊಡ್ಡ ಅನಾಹುತವನ್ನು ತಪ್ಪಿಸಿದೆ. ಚಾಲಕನ ಸಮಯ ಪ್ರಜ್ಞೆ ಹಾಗೂ ಧೈರ್ಯದಿಂದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.